ನಿಸ್ವಾರ್ಥ ಸೇವೆ ಮತ್ತು ಜನರ ವಿಶ್ವಾಸವೇ ನಿಜವಾದ ಅಭಿವೃದ್ಧಿ: ಡಿ.ಆರ್. ಪಾಟೀಲ

ನಿಸ್ವಾರ್ಥ ಸೇವೆ ಮತ್ತು ಜನರ ವಿಶ್ವಾಸವೇ ನಿಜವಾದ ಅಭಿವೃದ್ಧಿ: ಡಿ.ಆರ್. ಪಾಟೀಲ ನಿಸ್ವಾರ್ಥ ಸೇವೆ ಮತ್ತು ಜನರ ವಿಶ್ವಾಸವೇ ನಿಜವಾದ ಅಭಿವೃದ್ಧಿ: ಡಿ.ಆರ್. ಪಾಟೀಲ

ಕೊಪ್ಪಳ: ನಿಸ್ವಾರ್ಥದಿಂದ ಜನರ ಸೇವೆ ಮಾಡಿದರೆ ಅವರು ನಮಗೆ ಯಾವಾಗಲೂ ಆಶೀರ್ವಾದ ಮಾಡುತ್ತಾರೆ. ಹಾಗಾಗಿ ನಮ್ಮ ಸೇವೆ ಯಾವಾಗಲೂ ಜನಪರವಾಗಿರಬೇಕೆಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಡಿ.ಆರ್. ಪಾಟೀಲ್ ಹೇಳಿದರು. ಇಂದು ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲನಲ್ಲಿ ಜಿಲ್ಲಾಡಳಿತ. ಜಿಲ್ಲಾ ಪಂಚಾಯತ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 2026-27ನೇ ಸಾಲಿನ ಕೊಪ್ಪಳ ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆಯ ಜಿಲ್ಲಾ ಮಟ್ಟದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು
ನಾಯಕರಾದವರು ಮೊದಲು ಅವಕಾಶ ವಂಚಿತರಿಗೆ ಅನುಕೂಲ ಮಾಡಿಕೊಡಬೇಕು. ತಾವು ಕುರ್ಚಿಯಲ್ಲಿ ಕುಳಿತ ಮೇಲೆ ಜನರ ಸಮಸ್ಯೆಗಳಿಗೆ ಪರಿಹಾರ ನೀಡದಿದ್ದರೆ ಜಾತ್ರೆಯಲ್ಲಿ ದೇವರು ಕೂಡಿಸಿ ಮೆರೆಸಿದಂತಾಗುತ್ತದೆ. ತಮ್ಮಿಂದ ಸಮಾಜದಲ್ಲಿ ಪರಿವರ್ತನೆಯಾಗಬೇಕು. ಗ್ರಾಮ ಪಂಚಾಯತಿ, ತಾಲ್ಲೂಕು, ಜಿಲ್ಲಾ ಪಂಚಾಯತ ಹಾಗೂ ನಗರಸ್ಥಳೀಯ ಸಂಸ್ಥೆಯ ಜನಪ್ರತಿನಿಧಿಗಳು ಸೇರಿದರೆ ದೇಶದಲ್ಲಿ ತಾವು 32 ಲಕ್ಷ ಆಗುತ್ತೀರ. ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡಲು ದುಡ್ಡೆ ಬೇಕಿಲ್ಲ ಜನರ ಪ್ರೀತಿ ವಿಶ್ವಾಸ ಗಳಿಸುವ ಮೂಲಕ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಬಹುದು ಎಂದು ಜನಪ್ರತಿನಿಧಿಗಳಿಗೆ ಕಿವಿಮಾತು ಹೇಳಿದರು.
ನಿಮ್ಮ ಗ್ರಾಮಗಳ ಕೆಲಸಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಿದರೆ ಅದೇ ನಿಜವಾದ ಬದಲಾವಣೆಯಾಗುತ್ತದೆ. ಪಾರದರ್ಶಕವಾಗಿ ಕೆಲಸ ಮಾಡುವವರಿಗೆ ಸಮಾಜ ಯಾವಾಗಲೂ ಗೌರವಿಸುತ್ತದೆ. ನಿಸ್ವಾರ್ಥ ಸೇವೆಗಾಗಿ ಆಂತರಿಕ ಮನಸ್ಥಿತಿ ಬದಲಾಯಿಸಿಕೊಳ್ಳಬೇಕಿದೆ. ಸಮಾಜದಲ್ಲಿ ಅವಕಾಶ ವಂಚಿತರಿಗೆ ಸರಕಾರದ ಸೌಲಭ್ಯಗಳನ್ನು ನೀಡಬೇಕೆಂದು ಹೇಳಿದರು.


ಕೊಪ್ಪಳ ಜಿಲ್ಲಾಧಿಕಾರಿಗಳಾದ ಮಾನ್ಯ ಡಾ. ಸುರೇಶ ಬಿ. ಇಟ್ನಾಳ ಅವರು ಮಾತನಾಡಿ, ಅಧಿಕಾರ ವಿಕೇಂದ್ರೀಕರಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿರುವ ರಾಜ್ಯವಾಗಿದೆ. ಸಂವಿಧಾನದ 73 ಮತ್ತು 74ನೇ ತಿದ್ದುಪಡಿಗಿಂತ್ತಲೂ ಪೂರ್ವದಲ್ಲಿ ರಾಮಕೃಷ್ಣ ಹೆಗಡೆ ಯವರು ಮುಖ್ಯಮಂತ್ರಿ ಮತ್ತು ನಜೀರ್ ಸಾಹೇಬರು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದಾಗ ನಮ್ಮ ರಾಜ್ಯದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಯಲ್ಲಿತ್ತು. ಭಾರತದ ಮಾಜಿ ಪ್ರಧಾನ ಮಂತ್ರಿಗಳಾದ ದಿ. ರಾಜೀವ್ ಗಾಂಧಿಯವರು ಸಂವಿಧಾನದಲ್ಲಿ ತಿದ್ದುಪಡಿ ತಂದು ಈ ವ್ಯವಸ್ಥೆಯನ್ನು ದೇಶಾದ್ಯಂತ ವಿಸ್ತರಿಸಿದರು. ಅದರ ನಂತರದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ತ್ರಿಟಯರ್ ಸಿಸ್ಟಮ್ ಪ್ರಕಾರದಲ್ಲಿ ಗ್ರಾಮ ಪಂಚಾಯತ್, ತಾಲ್ಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ವ್ಯವಸ್ಥೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಇದರ ಮುಖ್ಯ ಉದ್ದೇಶ, ಗ್ರಾ.ಪಂ ಅಥವಾ ನಗರ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿ, ಅನುದಾನವನ್ನು ಜನರಿಗೆ ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಯೋಜನೆ ಮಾಡುವಂತಹ ಸ್ವಯತ್ತತೆ ನೀಡುವುದು ಮತ್ತು ಯೋಜನೆಯನ್ನು ರೂಪಿಸಿ, ಅನುಷ್ಠಾನ ಮಾಡುವ ಜವಾಬ್ದಾರಿಯನ್ನು ಸ್ಥಳೀಯವಾಗಿ ಆಯ್ಕೆಯಾದ ಜನಪ್ರತಿನಿಧಿಗಳು ಮಾಡಲೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯತ್ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ವರ್ಣಿತ್ ನೇಗಿ ಅವರು ಮಾತನಾಡಿ, ಕೊಪ್ಪಳ ಜಿಲ್ಲಾ ಯೋಜನೆ ಸಮಿತಿ ರಚನೆಗಾಗಿ ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಚುನಾವಣೆ ನಡೆಯುತ್ತಿದೆ. ಗ್ರಾಮ ಸ್ವರಾಜ್‌ಗಾಗಿ ಜಿಲ್ಲಾ ಮಟ್ಟದಲ್ಲಿ ಯೋಜನಾ ವರದಿ ಸಲ್ಲಿಕೆ ಆಗಲಿದೆ. ಇದರ ಎಲ್ಲಾ ಕೆಲಸಗಳು ಗ್ರಾಮ ಸಭೆಯಲ್ಲಿಯೇ ಆಗಲಿವೆ. ಮಹಾತ್ಮ ಗಾಂಧಿಜೀಯವರ ಗ್ರಾಮ ಸ್ವರಾಜ್ಯದ ಕನಸನ್ನು ಅನುಷ್ಠಾನ ಮಾಡಲು ಗ್ರಾಮಸಭೆಗಳು ಸರಿಯಾದ ರೀತಿಯಲ್ಲಾಗಬೇಕು. ಇದರ ಜೊತೆಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಪ್ರತಿ ತಿಂಗಳು ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕೆಂದು ಸಭೆಯನ್ನುದ್ದೇಶಿಸಿ ಮಾತನಾಡಿದರು.

ಗಾಂಧಿ ಸ್ಮಾರಕ ನಿಧಿ ಕಾರ್ಯದರ್ಶಿ ಶಿವರಾಜ, ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರ ರಾಜ್ಯ ಒಕ್ಕೂಟದ ಅಧ್ಯಕ್ಷರಾದ ಸತೀಶ್, ಪ್ರೋ. ಪ್ರಸನ್ನಮೂರ್ತಿ, ಬ್ರಹ್ಮಕುಮಾರಿ ಯೋಗಿನಿ ಅಕ್ಕನವರು ಕಾರ್ಯಕ್ರಮದಲ್ಲಿ ಮಾತನಾಡಿದರು.
ಈ ಸಭೆಯಲ್ಲಿ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿ.ಪಂ ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ ಸೇರಿದಂತೆ ಇತರೆ ವಿವಿಧ ಇಲಾಖೆಗಳ ಜಿಲಾ ಮಟ್ಟದ ಅಧಿಕಾರಿಗಳು ಜಿಲ್ಲೆಯ 153 ಗ್ರಾಮ ಪಂಚಾಯಿತಿಗಳ ಅಧ್ಯಕ್ಷರುಗಳು, ಉಪಾಧ್ಯಕ್ಷರು, 9 ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರುಗಳು, ಆಡಳಿತಾಧಿಕಾರಿಗಳು, ಜಿಲ್ಲೆಯ ಎಲ್ಲಾ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಯೋಜನಾಧಿಕಾರಿಗಳು, ಯೋಜನಾ ನಿರ್ದೇಶಕರು, ನಗರಸಭೆ ಪೌರಾಯುಕ್ತರು, ಪುರಸಭೆ ಹಾಗೂ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *